ಸತ್ಯಕಾಮ ವಾರ್ತೆ ಯಾದಗಿರಿ:
ಜಿಲ್ಲೆಯಲ್ಲಿನ ಜನರ ಗಂಭೀರ ಸ್ವರೂಪದ ಸಮಸ್ಯೆಗಳಾದ ಕುಡಿಯುವ ನೀರು,ಅನಕ್ಷರತೆ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಮರು ಸೇರ್ಪಡೆ ,ಜನರ ವಲಸೆ,ತಾಯಿ- ಶಿಶುಮರಣ ಪ್ರಮಾಣ ತಡೆ ಸೇರಿದಂತೆ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಪ್ರಥಮ ಆದ್ಯತೆ ನೀಡುವಂತೆ ರಾಯಚೂರು ಲೋಕಸಭಾ ಸದಸ್ಯರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷರಾದ ಜಿ.ಕುಮಾರ್ ನಾಯಕ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿನ ಗಂಭೀರ ಸ್ವರೂಪದ ಸಮಸ್ಯೆಗಳಿಗೆ ಆದ್ಯತೆ ಮೇಲೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು.ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಅಧಿಕಾರಿಗಳ ಮಧ್ಯೆ ಸಮನ್ವಯತೆ ಸಾಧಿಸಿ ,ಸಮಾಲೋಚಿಸಿ ಪರಿಹಾರ ಕಂಡುಕೊಳ್ಳುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯ ರೈತರಲ್ಲಿ ಯೂರಿಯಾ ಹಾಗೂ ಡಿಎಪಿ ಗೆ ಪರ್ಯಾಯವಾಗಿ ನೀಡಲಾಗುವ ನ್ಯಾನೋ ರಸಗೊಬ್ಬರ ಬಳಕೆ ಬಗ್ಗೆ ಸೂಕ್ತ ಜಾಗೃತಿ ಮೂಡಿಸಬೇಕು.ಸ್ಪ್ರೀಂಕ್ಲರ್, ಮಣ್ಣು ಪರೀಕ್ಷೆ,ಮಣ್ಣು ಪರೀಕ್ಷೆ ಕಾರ್ಡ್ ವಿತರಣೆ ಕುರಿತಂತೆ ಅವಶ್ಯಕ ಅರಿವು ಮೂಡಿಸಲು ಅವರು ಸೂಚಿಸಿದರು.
- Advertisement -
ಜಿಲ್ಲೆಯಲ್ಲಿ ಸುಮಾರು 662 ಮಕ್ಕಳು ಶಾಲೆಯಿಂದ ಹೊರಗುಳಿದ ಬಗ್ಗೆ ಆರ್ಡಿಪಿಆರ್ ಇಲಾಖೆಯಿಂದ ಸಮೀಕ್ಷೆ ಅನ್ವಯ ಗುರಿ ನೀಡಿದ್ದು,ಆಯಾ ಗ್ರಾಮ ಪಂಚಾಯತ್ ಅಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಎಸ್ ಡಿ ಎಮ್ ಸಿ ಹಾಗೂ ಗ್ರಾಮಸ್ಥರೊಂದಿಗೆ ಸಮನ್ವಯ ಸಾಧಿಸಿ ಸ್ಯಾಟ್ಸ ಆಧಾರಿತದಲ್ಲಿ ಪತ್ತೆ ಹಚ್ಚಿ ಶಾಲೆಗೆ ಸೇರಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಗರ್ಭಿಣಿ ತಾಯಿ -ಶಿಶುಮರಣ ಪ್ರಮಾಣ ತಡೆಯಲು ಪರಿಣಾಮಕಾರಿ ಆರೋಗ್ಯ ತಪಾಸಣೆ, ನಿವಾರಣಾ ಕ್ರಮ ಕೈಗೊಳ್ಳಬೇಕು. ಬಾಲ್ಯ ವಿವಾಹ ತಡೆ ಸವಾಲಾಗಿ ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.ಸಾಮಾಜಿಕ ಕಳಕಳಿ, ಮಾನವೀಯ ನೆಲೆಯಲ್ಲಿ ಕ್ರಮಗಳನ್ನು ಕೈಗೊಂಡಾಗ ಮಾತ್ರ ಈ ಸಮಸ್ಯೆ ಮತ್ತು ತಾಯಿ-ಶಿಶು ಮರಣ ಪ್ರಮಾಣ ತಡೆಯಲು ಸಾಧ್ಯ ಎಂದು ಹೇಳಿದರು.
ಜಿಲ್ಲೆಯ ಯಾದಗಿರಿ ಬೈಪಾಸ್ ರಸ್ತೆ, ಶಹಾಪುರ ಬೈಪಾಸ್ ರಸ್ತೆ, ರಾಮಸಮುದ್ರ ಹತ್ತಿರದಿಂದ ಗುರುಮಠಕಲ್ – ಹೈದರಾಬಾದ್ ರಸ್ತೆ, ಸೂರತ್- ಚೆನೈ ರಸ್ತೆಗಳ ವ್ಯಾಪ್ತಿಯ ಸಮಸ್ಯೆಗಳ ನಿವಾರಣೆಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಸಮಸ್ಯೆ ಪರಿಹರಿಸಬೇಕು. ಕೈಗೊಂಡ ಕ್ರಮದ ಬಗ್ಗೆ ವರದಿ ಸಹ ಸಲ್ಲಿಸುವಂತೆ ಅವರು ಸೂಚಿಸಿದರು.
ಕಡೆಚೂರ-ಬಾಡಿಯಾಳ ಸಮೀಪದ ರೈಲ್ವೆ ಬೋಗಿ ಕಾರ್ಖಾನೆಗೆ ನೀರು ಪೂರೈಕೆಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಸಮಸ್ಯೆಯಾಗಿ ಉಳಿದಿರುವ ರಾಷ್ಟ್ರೀಯ ಹೆದ್ದಾರಿನಡಿ ನೀರಿನ ಪೈಪ್ಲೈನ್ ಅಳವಡಿಕೆ ಸಮಸ್ಯೆಯನ್ನು ಕೆಐಎಡಿಬಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಮನ್ವಯತೆಯಿಂದ ಪರಿಹರಿಸಬೇಕು. ಯಾದಗಿರಿ ರೈಲ್ವೆ ನಿಲ್ದಾಣ ಕಾಮಗಾರಿಗಳು ಚುರುಕುಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅದರಂತೆ ಜಲಜೀವನ್ ಮಿಷನ್,ಜಲಧಾರೆ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಹೆಚ್ಚಿನ ಗಮನ ನೀಡಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೇಲುಸ್ತುವಾರಿಯಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೂಲಕ ಗುರಿಗೆ ತಕ್ಕಂತೆ ಕ್ರಮ ಕೈಗೊಳ್ಳಲು ತಿಳಿಸಿದರು.
- Advertisement -
ಪಶುಪಾಲನೆ ಇಲಾಖೆಯಿಂದ ಸರ್ಕಾರದ ನಿಯಮಾವಳಿಗಳ ಅನ್ವಯ ಅವಶ್ಯಕ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಸಂವಿಧಾನಬದ್ಧವಾಗಿ ಅವಶ್ಯಕ ಕ್ರಮಗಳನ್ನು ಕೈಗೊಳ್ಳಲು ವಿಪುಲ ಅವಕಾಶಗಳಿರುವದರಿಂದ ಅವಶ್ಯಕ ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು, ಜಿಲ್ಲೆಯಲ್ಲಿ ತಾಯಿ-ಶಿಶುಮರಣ ಪ್ರಮಾಣ ಹೆಚ್ಚಲು ಕಾರಣ, ರೈಲ್ವೆ ಬೋಗಿ ಕಾರ್ಖಾನೆಗೆ ನೀರು, ವಿದ್ಯುತ್ ಪೂರೈಕೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ಅಕ್ಕ ಕೆಫೆ ಹಾಗೂ ಇಂದಿರಾ ಕಾಂಟಿನೆಗಳಿಗೆ ಸ್ಥಳ ಗುರುತಿಸುವ ಮುನ್ನ ಆಯಾ ಶಾಸಕರ ಗಮನಕ್ಕೆ ತರಲು ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಸಂಸದರ ಗಮನಕ್ಕೆ ತಂದರು.
ಸುರಪುರ ಶಾಸಕ ರಾಜಾ ವೇಣುಗೋಪಾಲ್ ನಾಯಕ ಅವರು ಜಲಜೀವನ್ ಮಿಷನ್, ಜಲಧಾರೆ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕೋರಿದರು. ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಅವರು ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಬೋಗಿ ಕಾರ್ಖಾನೆಗೆ ನೀರು , ವಿದ್ಯುತ್ ಸಮಸ್ಯೆ,ಜಲಜೀವನ್ ಮಿಷನ್ ಯೋಜನೆಯಡಿಯ ಸಮಸ್ಯೆ ಪರಿಹರಿಸುವ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ,ಎಸ್,ಪಿ ಪೃಥ್ವಿಕ್ ಶಂಕರ್, ನಾಮನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು.
- Advertisement -

