ಸತ್ಯಕಾಮ ವಾರ್ತೆ ಯಾದಗಿರಿ:
ಸಣ್ಣ ಕೈಗಾರಿಕೆಗಳ ಸ್ಥಾಪನೆಯಿಂದ ಆರ್ಥಿಕ ವೃದ್ಧಿಯ ಜೊತೆಗೆ ಉದ್ಯೋಗ ಸೃಷ್ಟಿಗೂ ನೆರವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪುರ ಅವರು ಹೇಳಿದರು.
ನಗರದ ಎಸ್.ಡಿ.ಎನ್ ರೆಸಿಡೆನ್ಸಿ ಯಲ್ಲಿ ಇಂದು ಎಂ.ಎಸ್.ಎಂ.ಇ ಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಮತ್ತು ವೇಗ ಗೊಳಿಸುವುದು ಯೋಜನೆಯಡಿ ಲೀನ್ ಯೋಜನೆ ಮತ್ತು ಝಡ್ ಇಡಿ ಹಾಗೂ ರಫ್ತು ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡಿದಲ್ಲಿ ಆರ್ಥಿಕ ವೃದ್ಧಿ ಜೊತೆಗೆ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಲು ಸಾಧ್ಯವಿದೆ.ಈ ದಿಸೆಯಲ್ಲಿ ರಾಜ್ಯದ ಸಣ್ಣ ಉದ್ದಿಮೆದಾರರನ್ನು ತೊಂದರೆ ಮುಕ್ತಗೊಳಿಸಲು ರಾಜ್ಯ ಸರ್ಕಾರ ವಿಶೇಷ ಗಮನ ನೀಡುತ್ತಿದೆ ಎಂದು ಹೇಳಿದರು.
ಎಮ್ ಎಸ್ ಎಮ್ ಇ (micro and small and medium enterprises) ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ, ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾಶಿಯಾದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ನಿರ್ಣಯ ಕೈಗೊಂಡಿದ್ದಾರೆ ಎಂದು ಅವರು ಹೇಳಿದರು.
ಈ ಭಾಗದಲ್ಲಿ ಕೃಷಿಗೆ ಒತ್ತು ನೀಡಲಾಗುತ್ತಿದೆ.ಅದರಂತೆ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಗಮನ ನೀಡಿದಲ್ಲಿ ಕಾರ್ಮಿಕರ ಒಲಸೆ ಸಮಸ್ಯೆ ನಿವಾರಣೆಯಾಗಲಿದೆ.ಈ ದಿಸೆಯಲ್ಲಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಈ ಭಾಗದ ಮುಂಡರಗಿಯಲ್ಲಿ ಕನಿಷ್ಠ ಐವತ್ತುರಿಂದ ನೂರು ಎಕರೆ ಜಮೀನಿನಲ್ಲಿ ಸಣ್ಣ ಕೈಗಾರಿಕೆಗಳ ಉತ್ತೇಜನಕ್ಕೆ ,ಭೂ ಸ್ವಾಧೀನ ಪ್ರಕ್ರಿಯೆ ನಡೆದಿದೆ.ಅದರಂತೆ ಕಲ್ಯಾಣ ಕರ್ನಾಟಕ ಭಾಗದ ಕಲ್ಬುರ್ಗಿ, ಜೇವರ್ಗಿ,ಯಾದಗಿರಿ ಭಾಗಗಳಲ್ಲಿ ಕಡಿಮೆ ವೆಚ್ಚದ ಭೂ ನೀಡುವ ಉದ್ದೇಶ ಹೊಂದಲಾಗಿದ್ದು, ಶಹಾಪುರದಲ್ಲಿ 50 ಎಕರೆ ಜಮೀನು ಸಹ ಗುರುತಿಸಲಾಗಿದೆ ಎಂದು ಹೇಳಿದರು.
ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಪ್ರೋತ್ಸಾಹಿಸುತ್ತಿದ್ದು,ಕಾಸಿಯಾ ಸೇರಿದಂತೆ ವಿವಿಧ ಕೈಗಾರಿಕಾ ಸಂಸ್ಥೆಗಳ ಸಮಸ್ಯೆಗಳನ್ನು ಸರ್ಕಾರದ ಇತಿಮಿತಿಯಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು.ಉದ್ದಿಮೆದಾರರಿಗೆ ರಫ್ತು ಕುರಿತು ತರಬೇತಿ ಸಹ ನೀಡಿ ಪ್ರೋತ್ಸಾಹಿಸಲಾಗುತ್ತಿದೆ
ಎಂದು ಹೇಳಿದರು.
ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು, ಆರ್ಥಿಕ ಬೆಳವಣಿಗೆ ಹಾಗೂ ಉದ್ಯೋಗಾವಕಾಶಗಳ ಹೆಚ್ಚಿನ ಸೃಷ್ಟಿಗೆ ಸಣ್ಣ ಕೈಗಾರಿಕೆಗಳು ಬಹುಮುಖ್ಯ.ಉದ್ದಿಮೆದಾರರು ಆಧಾರ್ ಸ್ತಂಭವಾಗಿದ್ದು, ಜಿಲ್ಲಾಡಳಿತ ವತಿಯಿಂದ ಅವಶ್ಯಕ ನೆರವು ಒದಗಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕೆ ಸಂಸ್ಥೆ ಅಧ್ಯಕ್ಷ ದಿನೇಶ್ ಕುಮಾರ್ ಜೈನ್ ಮಾತನಾಡಿದರು.
ರೈಸ್ ಮಿಲ್ ಅಸೋಸಿಯೇಷನ್ ಅಧ್ಯಕ್ಷ ಹನುಮದಾಸ್ ಮುಂದಡಾ, ಸುರಪುರ ಕೈಗಾರಿಕೆ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಜೆಟ್ಟಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಸತೀಶ್ ಕುಮಾರ್, ಕಾರ್ಯದರ್ಶಿ ಗುರು ಮಣಿಕಂಠ,ವಿಟಿಪಿಸಿ ಸಹಾಯಕ ನಿರ್ದೇಶಕ ಜಾಫರ್ ಅನ್ಸಾರಿ, ಡೆಪ್ಯುಟಿ ಜನರಲ್ ಮ್ಯಾನೇಜರ್ ಕುಲಶೇಖರನ್ ಉಪಸ್ಥಿತರಿದ್ದರು .ರಿಪೋರ್ಟ ಆನ್ ಕರ್ನಾಟಕ ಎಕ್ಸ್ ಪೋರ್ಟ್ ಪುಸ್ತಕವನ್ನು ಸಚಿವರು ಬಿಡುಗಡೆಗೊಳಿಸಿದರು.ಉಪಾಧ್ಯಕ್ಷ ನಿಂಗಣ್ಣ ಎಸ್.ಬಿರಾದರ್ ಸ್ವಾಗತಿಸಿದರು.

