ಮಳೆಯಿಂದ 283 ಮನೆಗಳು ಭಾಗಶಃ ಹಾನಿ -ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ-ಕಳೆದ ಜೂನ್ 1 ರಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ 283 ಮನೆಗಳು ಭಾಗಶ: ಹಾನಿಗೊಂಡಿದ್ದು, ಹಾನಿಯಾದ ಮನೆಗಳ ಕುರಿತು ಜಂಟಿ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

ಇದಲ್ಲದೇ 20 ಕಿ.ಮೀ. ರಾಜ್ಯ ಹೆದ್ದಾರಿ, 27.50 ಕಿ.ಮೀ. ಜಿಲ್ಲಾ ಹೆದ್ದಾರಿ, 100 ಕಿ.ಮೀ. ಗ್ರಾಮೀಣ ರಸ್ತೆಗಳು ಸೇರಿದಂತೆ ಒಟ್ಟು 147.50 ಕಿ.ಮೀ. ರಸ್ತೆ, 84 ಸೇತುವೆಗಳು, 89 ಶಾಲಾ ಕೊಠಡಿಗಳು ಹಾಗೂ 38 ಅಂಗನವಾಡಿ ಕೇಂದ್ರಗಳು ಸಹ ಹಾನಿಗೊಳಗಾಗಿವೆ ಎಂದು ಅವರು ತಿಳಿಸಿದ್ದಾರೆ.

ತೀವ್ರ ಮಳೆಯಿಂದ ಜಿಲ್ಲೆಯಾದ್ಯಂತ 281 ವಿದ್ಯುತ್ ಕಂಬ್‌ಗಳು, 35 ಟ್ರಾನ್ಸ್ಫಾರ್ಮರ್‌ಗಳು ಹಾನಿಗೊಂಡಿದ್ದು, ಈ ಪೈಕಿ ಕ್ರಮವಾಗಿ 203 ವಿದ್ಯುತ್ ಕಂಬಗಳು ಮತ್ತು 31 ಟ್ರಾನ್ಸ್ಫಾರ್ಮರ್‌ಗಳನ್ನು ದುರಸ್ತಿಗೊಳಿಸಿ ವಿದ್ಯುತ್ ಪ್ರಸರಣಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಇನ್ನೂ ಜಿಲ್ಲೆಯಾದ್ಯಂತ ಮಳೆಯಿಂದ ಯಾವುದೇ ಕೃಷಿ, ತೋಟಗಾರಿಕೆ ಬೆಳೆಗಳು ಹಾನಿಯಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿನ ಮಳೆಯ ಪರಿಸ್ಥಿತಿ ಕುರಿತು ಈಗಾಗಲೇ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದ್ದು, ಅವರು ಅಗತ್ಯ ಸಲಹೆ ಸೂಚನೆ ನೀಡಿದ್ದು, ಅದನ್ನು ಪಾಲಿಸಲಾಗುತ್ತಿದೆ ಎಂದಿದ್ದಾರೆ.

*5 ಲಕ್ಷ ರೂ. ಪರಿಹಾರ ವಿತರಣೆ:*

ಕಳೆದ ಜುಲೈ 24 ರಂದು ಜೇವರ್ಗಿ ತಾಲೂಕಿನ ಬಿರಾಳ (ಬಿ) ಗ್ರಾಮದಲ್ಲಿ ಮಳೆಯಿಂದ ಮನೆ ಕುಸಿತ ಪರಿಣಾಮ ಗ್ರಾಮದ 38 ವರ್ಷದ ಬಸಮ್ಮ ಗಂಡ ಬಸವರಾಜ ಬಳಗಾರ ಅವರು ಮೃತಪಟ್ಟಿದ್ದು, ಮೃತರ ವಾರಸುದಾರರಿಗೆ ಸರ್ಕಾರದ ಮಾರ್ಗಸೂಚಿಯಂತೆ 5 ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಗಿದೆ. ಇನ್ನು ಜಿಲ್ಲೆಯಾದ್ಯಂತ ಯಾವುದೇ ಜಾನುವಾರುಗಳ ಪ್ರಾಣ ಹಾನಿ ಕುರಿತು ವರದಿಯಾಗಿಲ್ಲ ಎಂದು ಡಿ.ಸಿ. ಬಿ. ಫೌಜಿಯಾ ತರನ್ನುಮ್ ಅವರು ಸ್ಪಷ್ಟಪಡಿಸಿದ್ದಾರೆ.

*ಸಹಾಯವಾಣಿ ಸ್ಥಾಪನೆ:*

ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದ್ದು, ಭಾರಿ ಮಳೆಯಿಂದ ಸಾರ್ವಜನಿಕರಿಗೆ ಏನಾದರೂ ತೊಂದರೆಯಾದಲ್ಲಿ ಜಿಲ್ಲಾ ತುರ್ತು ನಿರ್ವಹಣಾ ಕೇಂದ್ರದ ಸಹಾಯವಾಣಿ ಸಂಖ್ಯೆ 08472-278677, ಟೋಲ್ ಫ್ರೀ ಸಂಖ್ಯೆ 1077ಗೆ ಸಂಪರ್ಕಿಸಲು ಕೋರಿದೆ.

ಇದಲ್ಲದೇ ತಾಲೂಕು ಹಂತದಲ್ಲಿ ಅಫಜಲಪುರ 08470-282020, ಆಳಂದ-08477-202428, ಚಿಂಚೋಳಿ-8475200113, ಚಿತ್ತಾಪುರ-08474-236250, ಜೇವರ್ಗಿ 08442-236024, ಕಲಬುರಗಿ-08472-278657/ 278636, ಕಾಳಗಿ 9741680444, ಕಮಲಾಪುರ-7411843393, ಸೇಡಂ 08441-276184, ಶಹಾಬಾದ-08477-202428 ಹಾಗೂ ಯಡ್ರಾಮಿ 8147003348ಗೆ ಸಂಪರ್ಕಿಸಬಹುದಾಗಿದೆ.

apvc-iconPost Views: 0

Comments

Leave a Reply

Your email address will not be published. Required fields are marked *