Tag: Bangalore

  • ನಿಯಮ ಮೀರಿ ಕಟ್ಟಿದ ಕಟ್ಟಡಗಳಿಗೆ ದೊಡ್ಡ ರಿಲೀಫ್

    ನಿಯಮ ಮೀರಿ ಕಟ್ಟಿದ ಕಟ್ಟಡಗಳಿಗೆ ದೊಡ್ಡ ರಿಲೀಫ್

    ರಾಜ್ಯದಲ್ಲಿ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ನಿಯಮ ಉಲ್ಲಂಘನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಹೆಚ್ಚಿನ ನಾಗರಿಕರು ಪರವಾನಗಿ ಪಡೆದು ಕಟ್ಟಡ ನಿರ್ಮಾಣ ಮಾಡಿದರೂ, ಸ್ಥಳ ಅಭಾವ, ಹೆಚ್ಚುವರಿ ಜಾಗದ ಅವಶ್ಯಕತೆ ಅಥವಾ ತಾಂತ್ರಿಕ ಕಾರಣಗಳಿಂದಾಗಿ ನಿಗದಿತ ಮಾನದಂಡಗಳು ಪಾಲನೆಯಾಗದೆ ಹೋಗಿರುವ ಅನೇಕ ಪ್ರಕರಣಗಳು ಬೆಳಕಿಗೆ ಬರುತ್ತವೆ. ಈ ಹಿನ್ನೆಲೆಯಲ್ಲಿ ಅನಧಿಕೃತ ಅಥವಾ ನಿಯಮ ಮೀರಿ ನಿರ್ಮಿಸಲಾದ ಕಟ್ಟಡಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಡವಿರುವುದರ ಜೊತೆಗೆ, ಜನರಿಗೆ ತೊಂದರೆ ಆಗದ ರೀತಿಯಲ್ಲಿ ಪರಿಹಾರ ಕೊಡಬೇಕೆಂಬ ಅಭಿಪ್ರಾಯವೂ ಸರ್ಕಾರದ ಮುಂದೆ ಇತ್ತು.

    ಈ ಎರಡನ್ನೂ ಪರಿಗಣಿಸಿದ ರಾಜ್ಯ ಸರ್ಕಾರ ಈಗ ಮಹತ್ವದ ನಿರ್ಧಾರ ಕೈಗೊಂಡಿದೆ. ನಿಗದಿತ ಮಿತಿಯ ಒಳಗಿರುವ ಉಲ್ಲಂಘನೆಗಳಿಗೆ ದಂಡ ಪಾವತಿಸಿ ಪರಿಷ್ಕೃತ ನಕ್ಷೆ (Revised Plan) ಪಡೆಯಲು ಅವಕಾಶ ನೀಡುವುದು ಸರ್ಕಾರದ ಹೊಸ ಆದೇಶದ ಮುಖ್ಯ ಅಂಶವಾಗಿದೆ. ಇದರಿಂದ ಸಾವಿರಾರು ಮನೆಗಳು ಮತ್ತು ವಾಣಿಜ್ಯ ಕಟ್ಟಡಗಳಿಗೆ ಕಾನೂನುಬದ್ಧ ಸ್ಥಾನ ಲಭಿಸುವ ಸಾಧ್ಯತೆ ಇದೆ.

    ಸರ್ಕಾರದ ಹೊಸ ಆದೇಶದ ಮುಖ್ಯ ಅಂಶಗಳು:

    • ಉಲ್ಲಂಘನೆ 15%ರ ಮಿತಿಯೊಳಗೆ ಇದ್ದರೆ ಮಾತ್ರ ಈ ವಿನಾಯಿತಿ ಅನ್ವಯ.
    • ಸೆಟ್‌ಬ್ಯಾಕ್ ಮತ್ತು ಕಾರ್ ಪಾರ್ಕಿಂಗ್ ಉಲ್ಲಂಘನೆಗಳಿಗೆ ದಂಡ ವಿಧಿಸಿ ಮಾನ್ಯತೆ ನೀಡಲಾಗುತ್ತದೆ.
    • ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ ಪಾರ್ಕಿಂಗ್ ಉಲ್ಲಂಘನೆಗೆ 5,000 ರೂ. ದಂಡ ಅನಿವಾರ್ಯ.
    • ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆ ಎಲ್ಲವೂ ಈ ಆದೇಶದ ವ್ಯಾಪ್ತಿಗೆ ಬರುತ್ತವೆ.

    ದಂಡದ ಪ್ರಮಾಣ (Local Body-wise)

    ಪಟ್ಟಣ ಪಂಚಾಯಿತಿ ವ್ಯಾಪ್ತಿ: 

    • ವಸತಿ/ಕೈಗಾರಿಕಾ ಕಟ್ಟಡ: ಪ್ರತಿ ಚ.ಮೀಗೆ 1,000 ರೂ.
    • ವಾಣಿಜ್ಯ ಕಟ್ಟಡ: ಪ್ರತಿ ಚ.ಮೀಗೆ 1,500 ರೂ.

    ಪುರಸಭೆ ವ್ಯಾಪ್ತಿ: 

    • ವಸತಿ/ಕೈಗಾರಿಕಾ ಕಟ್ಟಡ: ಪ್ರತಿ ಚ.ಮೀಗೆ 1,200 ರೂ.
    • ವಾಣಿಜ್ಯ ಕಟ್ಟಡ: ಪ್ರತಿ ಚ.ಮೀಗೆ 1,800 ರೂ.

    ನಗರಪಾಲಿಕೆ ವ್ಯಾಪ್ತಿ:

    • ವಸತಿ/ಕೈಗಾರಿಕಾ ಕಟ್ಟಡ: ಪ್ರತಿ ಚ.ಮೀಗೆ 1,500 ರೂ.
    • ವಾಣಿಜ್ಯ ಕಟ್ಟಡ: ಪ್ರತಿ ಚ.ಮೀಗೆ 2,250 ರೂ.

    ಮಹಾನಗರ ಪಾಲಿಕೆ ವ್ಯಾಪ್ತಿ: 

    • ವಸತಿ/ಕೈಗಾರಿಕಾ ಕಟ್ಟಡ: ಪ್ರತಿ ಚ.ಮೀಗೆ 2,000 ರೂ.
    • ವಾಣಿಜ್ಯ ಕಟ್ಟಡ: ಪ್ರತಿ ಚ.ಮೀಗೆ 3,000 ರೂ.

    ಈ ಹೊಸ ಆದೇಶದಿಂದ ನಿಯಮ ಮೀರಿ ನಿರ್ಮಿಸಲಾದ ಅನೇಕ ಕಟ್ಟಡಗಳಿಗೆ ಕಾನೂನುಬದ್ಧ ಸ್ಥಾನ ದೊರೆತು, ಜನರಿಗೆ ದೀರ್ಘಕಾಲದ ಸಮಸ್ಯೆಗೆ ಪರಿಹಾರ ದೊರಕಲಿದೆ. ಅದರೊಂದಿಗೆ ಕಟ್ಟಡ ನಿರ್ಮಾಣದಲ್ಲಿ ನಿಯಮ ಪಾಲನೆಯ ಬಗ್ಗೆ ಜನರಲ್ಲಿ ಜಾಗೃತಿ ಹೆಚ್ಚಿಸುವುದಕ್ಕೂ ಇದು ನೆರವಾಗಲಿದೆ.

  • “ಕ್ಯಾಮೆರಾದಲ್ಲಿ ಸೆರೆ ಹಿಡಿದು ನಿಮ್ಮ ಮನೆ ಮುಂದೆ ಕಸ ತಂದು ಹಾಕ್ತೀನಿ” : ಡಿಕೆಶಿ ಕಠಿಣ ಎಚ್ಚರಿಕೆ

    “ಕ್ಯಾಮೆರಾದಲ್ಲಿ ಸೆರೆ ಹಿಡಿದು ನಿಮ್ಮ ಮನೆ ಮುಂದೆ ಕಸ ತಂದು ಹಾಕ್ತೀನಿ” : ಡಿಕೆಶಿ ಕಠಿಣ ಎಚ್ಚರಿಕೆ

    ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಕಸದ ಸಮಸ್ಯೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಠಿಣ ಎಚ್ಚರಿಕೆ ನೀಡಿದ್ದಾರೆ. “ರಸ್ತೆ, ಬೀದಿ ಎಲ್ಲ ಕಡೆ ಕ್ಯಾಮೆರಾ ಹಾಕ್ತಿದ್ದೇವೆ. ಯಾರಾದರೂ ಸಾರ್ವಜನಿಕ ಸ್ಥಳದಲ್ಲಿ ಕಸ ಹಾಕಿದ್ರೆ, ಆ ದೃಶ್ಯ ನೋಡಿ ಅವರ ಮನೆ ಮುಂದೆ ಕಸ ತಂದು ಹಾಕ್ತೀನಿ!” ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಸದ ಬಗ್ಗೆ ನಿರಂತರ ಟೀಕೆ ಮಾಡುತ್ತಿರುವ ನಾಗರಿಕರು ಮತ್ತು ಮಾಧ್ಯಮಗಳನ್ನು ಗುರಿಯಾಗಿಸಿ ಮಾತನಾಡಿದರು. “ಈ ಸಮಸ್ಯೆ ಬೆಂಗಳೂರು ಮಾತ್ರದಲ್ಲ, ಇನ್ನೂ ಅನೇಕ ನಗರಗಳಲ್ಲಿ ಇದೆ. ಆದ್ರೆ ಮಾಧ್ಯಮಗಳು ಇಲ್ಲಿ ಮಾತ್ರ ಹೆಚ್ಚು ತೋರಿಸ್ತಾರೆ. ಈಗ ಇದಕ್ಕೆ ಸ್ಪಷ್ಟ ಪರಿಹಾರ ಕೊಡ್ತಿದ್ದೀವಿ ನಗರಪಾಲಿಕೆಯಿಂದ ಹೊಸ ಕ್ಯಾಮೆರಾ ಜಾಲ ಹಾಕಲಾಗುತ್ತದೆ. ಯಾರೂ ಸಹ ರಸ್ತೆ, ಬಸ್ ನಿಲ್ದಾಣ ಅಥವಾ ಸಾರ್ವಜನಿಕ ಸ್ಥಳಗಳಿಗೆ ಕಸ ಹಾಕಬಾರದು” ಎಂದು ಹೇಳಿದರು.

    ಅವರು ಮುಂಬೈಗೆ ಭೇಟಿ ನೀಡಿದ ಸಂದರ್ಭದ ಘಟನೆ ಒಂದನ್ನು ಹಂಚಿಕೊಂಡು, “ಅಲ್ಲೂ ಕೆಲವರು ರಸ್ತೆಗೆ ಕಸ ಹಾಕಿದ್ದರು, ನಾವು ಹಿಂಬಾಲಿಸಿ ಅವರ ಮನೆ ಮುಂದೆಯೇ ಕಸ ಬಿಟ್ಟು ಬಂದಿದ್ದೇವೆ” ಎಂದು ಉದಾಹರಣೆ ನೀಡಿದ್ದಾರೆ. “ಕಸವನ್ನು ವಾಹನಗಳಲ್ಲಿ ಹಾಕಿ ಬೇರೆಡೆ ಬಿಸಾಡುವ ಏಜೆಂಟರ ಮೇಲೂ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಎಚ್ಚರಿಸಿದರು.

    ಡಿಕೆಶಿ ನಾಗರಿಕರಿಗೆ ಕರೆ ನೀಡಿ, “ಪ್ರತಿ ಮನೆಯಲ್ಲೂ ಕಸದ ಡಬ್ಬಿ ಇಡಿ. ನಮ್ಮ ವಾಹನ ಮನೆ ಮನೆಗೆ ಬರುತ್ತದೆ, ಕಸವನ್ನು ಅದಕ್ಕೆ ನೀಡಿ. ಚಿತ್ರ ತೆಗೆದು ಟೀಕೆ ಮಾಡುವುದಕ್ಕಿಂತ ಸ್ವಚ್ಛತೆಗೆ ಸಹಕರಿಸಿ” ಎಂದು ಮನವಿ ಮಾಡಿದರು.

    ಕಾಂಟ್ರ್ಯಾಕ್ಟರ್‌ ಮಾದರಿ ನಿರ್ವಹಣೆ ನಗರದ ಮುಖ್ಯರಸ್ತೆಗಳು ಮತ್ತು ಪ್ರಮುಖ ಪ್ರದೇಶಗಳಲ್ಲಿ ಕಸದ ನಿರ್ವಹಣೆ ಕಾಂಟ್ರ್ಯಾಕ್ಟರ್‌ಗಳಿಗೆ ಹಸ್ತಾಂತರಿಸುವ ಆಲೋಚನೆಯೂ ನಡೆಯುತ್ತಿದೆ ಎಂದು ಅವರು ಹೇಳಿದ್ದಾರರೆ. ಸ್ವಚ್ಛ ನಗರ ನಿರ್ಮಾಣಕ್ಕಾಗಿ ಕಠಿಣ ಕ್ರಮ ಕೈಗೆತ್ತಿಕೊಳ್ಳಲಿರುವುದಾಗಿ ಡಿಕೆಶಿ ಹೇಳಿದ್ದು, “ನಿಯಮ ಉಲ್ಲಂಘನೆ ಮಾಡಿದರೆ ಯಾರನ್ನೂ ಬಿಡಲ್ಲ” ಎಂದು ಎಚ್ಚರಿಕೆ ನೀಡಿದರು.

  • ಪುಷ್ಪಾ ಸ್ಟೈಲ್‌ನಲ್ಲಿ ಸ್ಮಗ್ಲಿಂಗ್ ಪ್ಲಾನ್-750 ಕೆ.ಜಿ. ಶ್ರೀಗಂಧ ವಶ

    ಪುಷ್ಪಾ ಸ್ಟೈಲ್‌ನಲ್ಲಿ ಸ್ಮಗ್ಲಿಂಗ್ ಪ್ಲಾನ್-750 ಕೆ.ಜಿ. ಶ್ರೀಗಂಧ ವಶ

    ಕರ್ನಾಟಕದ ಶ್ರೀಗಂಧವು ವಿಶ್ವಪ್ರಸಿದ್ಧ. ಅದರ ಸುಗಂಧ ಮತ್ತು ಔಷಧೀಯ ಗುಣಗಳ ಕಾರಣದಿಂದಾಗಿ ವಿದೇಶಗಳಲ್ಲಿ ಇದರ ಬೇಡಿಕೆ ಅಪಾರವಾಗಿದೆ. ಆದರೆ ಇದೇ ಬೇಡಿಕೆ ಅಕ್ರಮ ಕಟಾವು ಮತ್ತು ಕಳ್ಳಸಾಗಣೆಗೆ ದಾರಿ ಮಾಡಿಕೊಟ್ಟಿದೆ. ಸರ್ಕಾರ ಕಾನೂನು ಬಿಗಿಗೊಳಿಸಿದ್ದರೂ, ಲಾಭದಾಸೆಯೆಡೆಗೆ ಕಣ್ಣಿಟ್ಟ ಕಳ್ಳರು ಹೊಸ ಹೊಸ ಮಾರ್ಗಗಳನ್ನು ಹುಡುಕುತ್ತಿದ್ದಾರೆ.

    ಪುಷ್ಪ ಸಿನಿಮಾದಲ್ಲಿ ನೀವು ನೋಡಿದಂತೆ ರಕ್ತಚಂದನ ಕಳ್ಳಸಾಗಣೆ ಹೇಗೆ ನಡೆಯುತ್ತದೋ, ಅದೆ ರೀತಿ ಈಗ ನೈಜ ಜೀವನದಲ್ಲಿಯೂ ಕಳ್ಳರು ಹೊಸ ಹೊಸ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಇತ್ತೀಚೆಗೆ ಸಿದ್ದಾಪುರ ಪೊಲೀಸರು ಪತ್ತೆ ಹಚ್ಚಿದ ಘಟನೆಯೊಂದು ಇದಕ್ಕೆ ನಿದರ್ಶನವಾಗಿದೆ ಎನ್ನಬಹುದು. ಈ ಬಾರಿ ಕಳ್ಳರು ಈರುಳ್ಳಿ ಮೂಟೆಯೊಳಗೆ ಶ್ರೀಗಂಧದ ತುಂಡುಗಳನ್ನು ಮರೆಮಾಡಿ ಸಾಗಿಸುತ್ತಿದ್ದರು!

    ಆಂಧ್ರಪ್ರದೇಶದ ಕರ್ನೂಲ್‌ನಿಂದ ಬೆಂಗಳೂರಿನತ್ತ ಬರುತ್ತಿದ್ದ ವ್ಯಾನ್‌ನಿಂದ ಈ ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ ಸಿದ್ದಾಪುರ ಪೊಲೀಸರು ವ್ಯಾನ್‌ನ್ನು ತಡೆದು ಪರಿಶೀಲಿಸಿದಾಗ, ಮೊದಲ ನೋಟಕ್ಕೆ ಇದು ಸಾಮಾನ್ಯ ಈರುಳ್ಳಿ ಸಾಗಾಟವೆಂದು ಕಂಡಿತು. ಆದರೆ ತಪಾಸಣೆ ವೇಳೆ ಈರುಳ್ಳಿ ಚೀಲಗಳ ಅಡಿಯಲ್ಲಿ ಮರೆಮಾಡಲಾಗಿದ್ದ 18 ಮೂಟೆಗಳಲ್ಲಿ ಸುಮಾರು 750 ಕೆ.ಜಿ. ಶ್ರೀಗಂಧದ ತುಂಡುಗಳು ಪತ್ತೆಯಾಗಿವೆ.

    ಆಂಧ್ರದ ಸಿರಾಜ್ ಎಂಬಾತ ಈ ದೊಡ್ಡ ಅಕ್ರಮ ಚಟುವಟಿಕೆಯ ಮಾಸ್ಟರ್‌ಮೈಂಡ್ ಆಗಿದ್ದಾನೆ. ತನ್ನ ತಂಡದವರಾದ ಶೇಖ್ ಶಾರೂಕ್, ಶೇಖ್ ಅಬ್ದುಲ್, ಪರಮೇಶ್ ಮತ್ತು ರಾಮ್ ಭೂಪಾಲ್ ಜೊತೆ ಸೇರಿ, ಕರ್ನೂಲ್ ಕಾಡುಗಳಲ್ಲಿ ಶ್ರೀಗಂಧ ಮರಗಳನ್ನು ಕತ್ತರಿಸಿ, ಈರುಳ್ಳಿ ಮಾರಾಟಗಾರರ ವೇಷದಲ್ಲಿ ಬೆಂಗಳೂರಿಗೆ ತರಲಾಗುತ್ತಿತ್ತು. ನಂತರ ಬೆಂಗಳೂರಿನ ಅಕ್ರಮ ಡೀಲರ್‌ಗಳ ಮೂಲಕ ಶ್ರೀಗಂಧವನ್ನು ವಿದೇಶಗಳಿಗೆ ವಿಶೇಷವಾಗಿ ಚೀನಾಗೆ ಕಳುಹಿಸುವ ಯೋಜನೆ ಮಾಡಿಕೊಂಡಿದ್ದರು ಎನ್ನಲಾಗಿದೆ.

    ಸಿದ್ದಾಪುರ ಠಾಣಾ ಪೊಲೀಸರು ಅಡ್ಡಗಟ್ಟಿ ತಪಾಸಣೆ ನಡೆಸಿ ಈ ಕಳ್ಳರ ಕೃತ್ಯವನ್ನು ಪತ್ತೆಹಚ್ಚಿದರು. ಕಳ್ಳಸಾಗಣೆಗಾರರನ್ನು ಸ್ಥಳದಲ್ಲೇ ಬಂಧಿಸಿ, ವ್ಯಾನ್‌ ಸೇರಿದಂತೆ ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ. ಒಟ್ಟು 750 ಕೆ.ಜಿ. ತೂಕದ ಶ್ರೀಗಂಧದ ಮರದ ತುಂಡುಗಳ ಮೌಲ್ಯ ಲಕ್ಷಾಂತರ ರೂ.ಗಳಲ್ಲಿ ಅಂದಾಜಿಸಲಾಗಿದೆ. ಪೊಲೀಸರು ಈಗ ಈ ಅಕ್ರಮ ಜಾಲದ ಹಿನ್ನಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಮೂಲದ ಡೀಲರ್ ಹುಡುಕಾಟವನ್ನು ಪ್ರಾರಂಭಿಸಿದ್ದಾರೆ.

    ಈ ಪ್ರಕರಣದಿಂದ ಸುವಾಸನೆಯ ಶ್ರೀಗಂಧದ ಹಿಂದೆ ಅಡಗಿರುವ ಅಕ್ರಮದ ದುರ್ವಾಸನೆ ಮತ್ತೆ ಹೊರಬಿದ್ದಂತಾಗಿದೆ.

  • ರಾಜಧಾನಿಯಲ್ಲಿ ಕುಂದಾಪ್ರ ಕನ್ನಡ ಹಬ್ಬ: ಆಗಸ್ಟ್ 17-18ರಂದು ಅರಮನೆ ಮೈದಾನದಲ್ಲಿ ಅದ್ಧೂರಿ ಆಯೋಜನೆ

    ರಾಜಧಾನಿಯಲ್ಲಿ ಕುಂದಾಪ್ರ ಕನ್ನಡ ಹಬ್ಬ: ಆಗಸ್ಟ್ 17-18ರಂದು ಅರಮನೆ ಮೈದಾನದಲ್ಲಿ ಅದ್ಧೂರಿ ಆಯೋಜನೆ

    • ಐದನೇ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
      ಜೋಡಾಟ-ರಥೋತ್ಸವ ಸೇರಿ ಹಲವು ಆಕರ್ಷಣೆ
    ಸತ್ಯಕಾಮ ವಾರ್ತೆ ಬೆಂಗಳೂರು: 
    ಕರಾವಳಿಯ ಕುಂದಗನ್ನಡಿಗರು ತಮ್ಮ ಭಾಷೆ-ಬದುಕಿನ ಮೇಲಿನ ಅಭಿಮಾನದಿಂದ ಪ್ರತಿವರ್ಷ 'ವಿಶ್ವ ಕುಂದಾಪ್ರ/ಕುಂದಾಪುರ ಕನ್ನಡ ದಿನ'ವನ್ನು ಆಚರಣೆ ಮಾಡುತ್ತಿದ್ದು, ಈ ಸಲ ಬೆಂಗಳೂರಿನಲ್ಲಿ ಅದು ಎಂದಿಗಿಂತ ಅದ್ಧೂರಿಯಾಗಿ ನಡೆಯಲಿದೆ.

    ಈ ಬಾರಿ ಕುಂದಾಪುರ ಕನ್ನಡ ದಿನಾಚರಣೆಯು ಬೆಂಗಳೂರಿನ ಅರಮನೆ ಮೈದಾನದಲ್ಲಿ ಎರಡು ದಿನ ವಿಜೃಂಭಣೆಯಿಂದ ನೆರವೇರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಕುಂದಗನ್ನಡ ಲೋಕವನ್ನು ಭರ್ಜರಿಯಾಗಿ ಅನಾವರಣಗೊಳಿಸುವ ಈ ಕಾರ್ಯಕ್ರಮ ಆಗಸ್ಟ್ 17 ಮತ್ತು 18ರಂದು ಅರಮನೆ ಮೈದಾನದ ವೈಟ್ ಪೆಟಲ್ಸ್‌ನಲ್ಲಿ ನಡೆಯಲಿದೆ.

    ‘ಕುಂದಾಪ್ರ ಕನ್ನಡ ಪ್ರತಿಷ್ಠಾನ, ಬೆಂಗಳೂರು’ ಮೂಲಕ ಆಯೋಜನೆ ಆಗುತ್ತಿರುವ ಈ ಆಚರಣೆಯ ದಿನ-ಸ್ಥಳ ಘೋಷಣೆ ಕುರಿತು ಬೆಂಗಳೂರಿನ ಸುದೀಕ್ಷಾ ಕನ್ವೆನ್ಷನ್ ಹಾಲ್‌ನಲ್ಲಿ ಜು. 7ರಂದು ಹಮ್ಮಿಕೊಂಡಿದ್ದ ‘ವಾಲ್ಗ’ ಕಾರ್ಯಕ್ರಮದಲ್ಲಿ ವಿವರಗಳನ್ನು ನೀಡಲಾಯಿತು. ಆರು ವರ್ಷಗಳ ಹಿಂದೆ ಈ ಆಚರಣೆ ಆರಂಭವಾಗಿದ್ದು, ಇದು ಐದನೇ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಆಗಿದೆ.

    Video: ರಾಜಧಾನಿಯಲ್ಲಿ ಕುಂದಾಪ್ರ ಕನ್ನಡ ಹಬ್ಬ: ಆಗಸ್ಟ್ 17-18ರಂದು ಅರಮನೆ ಮೈದಾನದಲ್ಲಿ ಅದ್ಧೂರಿ ಆಯೋಜನೆ

    ಕಳೆದ ನಾಲ್ಕು ಕುಂದಾಪ್ರ ಕನ್ನಡ ಹಬ್ಬಗಳು ವಿಜಯನಗರದ ಬಂಟರ ಸಂಘದಲ್ಲಿ ಆಗಿದ್ದವು. ಆದರೆ ಅದಕ್ಕೆ ಬೃಹತ್ ಜನಸ್ತೋಮ ಹರಿದುಬಂದಿದ್ದು ಸುಮಾರು ಶೇ. 70 ಜನರಿಗೆ ಬಂಟರ ಸಂಘಕ್ಕೆ ಪ್ರವೇಶಿಸಲಿಕ್ಕೂ ಆಗಿರಲಿಲ್ಲ. ಹೀಗಾಗಿ ಈ ವರ್ಷ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ, ಈ ಬಾರಿ ಇನ್ನೂ ದೊಡ್ಡ ಪ್ರಮಾಣದಲ್ಲಿ ಜನರು ಸೇರಲಿದ್ದಾರೆ ಎಂದು ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ದೀಪಕ್ ಶೆಟ್ಟಿ ಬಾರ್ಕೂರು ತಿಳಿಸಿದರು.

    ಬೃಹತ್ ಮೆರವಣಿಗೆ: ಎರಡು ದಿನಗಳ ಈ ಕಾರ್ಯಕ್ರಮ ‘ದಿಬ್ಣ’ದೊಂದಿಗೆ ಆರಂಭವಾಗಲಿದೆ. ಅದರಲ್ಲಿ ಬೆಂಗಳೂರಿನ ಕನಿಷ್ಠ 10 ಕಡೆಗಳಿಂದ ಜನರು ಮೆರವಣಿಗೆ ಮೂಲಕ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಲಿದ್ದಾರೆ. ‘ನಾಕ್ ಘನಾ ಸುರ್ಲ್’ ಎಂಬ ಕರಾವಳಿಯ ಅದ್ಭುತ ಗೀತೆಗಳ ಗಾಯನವಿರಲಿದೆ. ನಂತರ ‘ನುಡಿ ಚಾವಡಿ’ ಎಂಬ ಕಾರ್ಯಕ್ರಮದ ಮೂಲಕ ಉದ್ಘಾಟನಾ ಸಮಾರಂಭ ನಡೆಯಲಿದೆ. ಅ.17ರ ರಾತ್ರಿ ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ‘ಜೋಡಾಟ’ ನಡೆಯಲಿದೆ. ರಾಜ್ಯದ ಯಕ್ಷರಂಗದ ಮೇರು ಕಲಾವಿದರು ಭಾಗವಹಿಸಲಿರುವ ಈ ಯಕ್ಷಗಾನಕ್ಕೇ 15-20 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದು ದೀಪಕ್ ಶೆಟ್ಟಿ ವಿವರಿಸಿದರು. ಮಾತ್ರವಲ್ಲದೆ, ಕನ್ನಡ ಚಿತ್ರರಂಗದ ಸ್ಟಾರ್ ನಟ-ನಿರ್ದೇಶಕರು ಸೇರಿದಂತೆ ಹಲವು ತಾರೆಯರು ಕೂಡ ಭಾಗಿ ಆಗಲಿರುವುದರಿಂದ ಈ ಸಂಭ್ರಮಕ್ಕೆ ತಾರಾ ಕಳೆ ಇರಲಿದೆ ಎಂದರು.

    ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು, ಖ್ಯಾತ ಚಿತ್ರ ಸಾಹಿತಿ ಪ್ರಮೋದ್ ಮರವಂತೆ, ಕುಂದಾಪ್ರ ಕನ್ನಡ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯಕುಮಾರ್ ಹೆಗ್ಡೆ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು, ಯುನಿವರ್ಸಲ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಸಂಸ್ಥಾಪಕ ನಿರ್ದೇಶಕ ಆರ್.ಉಪೇಂದ್ರ ಶೆಟ್ಟಿ, ಹೋಟೆಲೋದ್ಯಮಿ ಸತೀಶ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    ಏನಿದು ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ?
    ಆಸಾಡಿ ಅಮಾಸಿ/ ಆಟಿ ಅಮಾವಾಸ್ಯೆ (ಕರ್ಕಾಟಕ ಅಮಾವಾಸ್ಯೆ) ದಿನ ಕರಾವಳಿಗರಿಗೆ ಅತ್ಯಂತ ವಿಶೇಷವಾದದ್ದು. ಕಳೆದ ಐದು ವರ್ಷಗಳಿಂದ ಪ್ರತಿ ವರ್ಷ ಈ ಕರ್ಕಾಟಕ ಅಮಾವಾಸ್ಯೆ ದಿನವನ್ನು ವಿಶ್ವ ಕುಂದಾಪ್ರ ಕನ್ನಡ ದಿನ ಎಂದು ಆಚರಣೆ ಮಾಡಲಾಗುತ್ತಿದ್ದು, ಈ ಸಲ ಆಗಸ್ಟ್ 04ರಂದು ಆಷಾಢ ಅಮಾವಾಸ್ಯೆ ಬಂದಿದೆ. ಅದು ವಾರದ ದಿನವಾದ್ದರಿಂದ, ಆಯೋಜನೆ ಹಾಗೂ ಆಗಮಿಸುವ ಅತಿಥಿ ಗಣ್ಯರ ಅನುಕೂಲದ ದೃಷ್ಟಿಯಿಂದ ಬೆಂಗಳೂರಿನಲ್ಲಿ ಆಗಸ್ಟ್ 17, 18ರಂದು ವಿಶ್ವ ಕುಂದಾಪುರ ಕನ್ನಡ ದಿನವನ್ನು ಕುಂದಾಪ್ರ ಕನ್ನಡ ಹಬ್ಬವಾಗಿ ಆಚರಿಸಲಾಗುತ್ತಿದೆ. ಕುಂದಾಪ್ರ ಕನ್ನಡ ಹಬ್ಬವು ಹಲವು ಸಾಂಸ್ಕೃತಿಕ ಸಡಗರಗಳಿಗೆ ಇದು ವೇದಿಕೆ ಆಗಲಿದ್ದು, ಕುಂದಾಪ್ರ ಕನ್ನಡ ಭಾಷೆಯ ಸೊಬಗನ್ನು ಪಸರಿಸಲಿದೆ.

    ಇದು ಸಣ್ಣ ಆಲೋಚನೆ ಅಲ್ಲ‌. ಹಬ್ಬದ ಸಂಭ್ರಮ ಮಾತ್ರವಲ್ಲದೆ ಎಲ್ಲರನ್ನೂ ಒಂದೇ ವೇದಿಕೆಯಲ್ಲಿ ಸೇರಿಸುವ ಬೃಹತ್ ಕಾರ್ಯಕ್ರಮ. ಇದು ಕುಂದಾಪುರದ ವೈಶಿಷ್ಟ್ಯ ಎಲ್ಲರಿಗೂ ತೋರಿಸಿ ಬೆಳೆಸುವ ಅದ್ಭುತ ಪ್ರಯತ್ನ.
    – ರವಿ ಬಸ್ರೂರು, ಖ್ಯಾತ ಸಂಗೀತ ನಿರ್ದೇಶಕ.

    2 ದಿನಗಳ ಕಾರ್ಯಕ್ರಮಗಳ ಪಟ್ಟಿ
    * ‘ಹಂದಾಡ್ತ ನೆಗ್ಯಾಡಿ’: ಕುಂದಾಪ್ರ ಕನ್ನಡದ ನಗೆ ರಾಯಭಾರಿ ಮನು ಹಂದಾಡಿ ಅವರಿಂದ ನಗೆ ಪ್ರಹಸನ.
    * ‘ಬಯಲಾಟ’: ಗ್ರಾಮೀಣ ಕ್ರೀಡೋತ್ಸವ
    * ‘ರಥೋತ್ಸವ’: ಹಬ್ಬದ ರೀತಿಯಲ್ಲೇ ಭಾವಬೀದಿಯಲ್ಲಿ ಭಾಷೆಯ ತೇರು.
    * ‘ಪೆಟ್ಟ್ ಒಂದೇ, ಸ್ವರ ಬೇರೆ’: ಆಫ್ರಿಕದ ಜಂಬೆ, ಕುಂದಾಪುರದ ಚೆಂಡೆ ಜುಗಲ್ ಬಂದಿ.
    * ‘ಭುಜಬಲದ ಪರಾಕ್ರಮ’ ಹಗ್ಗಜಗ್ಗಾಟ 8 ಊರಿನ ಹೆಸರಲ್ಲಿ ತಂಡ.
    * ‘ಯಬ್ಯಾ ಸೌಂಡೇ’: ರವಿ ಬಸ್ರೂರು ಅವರ ಶತಕುಂದ ಪದ್ಯಗಳ ಡಿಜೆ
    * ‘ಡ್ಯಾನ್ಸ್ ಕುಂದಾಪ್ರ ಡ್ಯಾನ್ಸ್’: ವಿಶೇಷ ನೃತ್ಯ‌ ಪ್ರದರ್ಶನ
    * ‘ಗಂಡಿನ್ ಪಿಚ್ಚರ್ ಬಿಡ್ತ್’: ವಿಶೇಷ ಕಿರುಚಿತ್ರ ಪ್ರದರ್ಶನ
    * ‘ನಮ್ ಊರ್ಮನಿ ಪಿಚ್ಚರ್ ಯಾಕ್ಟ್ರ್ಸ್’: ಊರಿನ ಸಿನಿತಾರೆಯರು, ಸೂಪರ್ ಸ್ಟಾರ್‌ಗಳ ಸಮಾಗಮ.
    * ‘ಕುಂದಾಪ್ರ ಸಂತಿ’: ಕುಂದಾಪುರದಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಸಂತೆ.
    * ‘ಹೊಟ್ಟಿ ಕಂಡದ್ ನಾವೇ ಸೈ’: ಕರಾವಳಿಯ ವಿಶೇಷ ಖಾದ್ಯ ಮೇಳ.

  • ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್ ಆರ್ ಐ ಕೋಟಾ ಕೋರಿ ಕೇಂದ್ರಕ್ಕೆ ಪತ್ರ ಬರೆದ ಸಚಿವ ಶರಣಪ್ರಕಾಶ್ ಪಾಟೀಲ್

    ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್ ಆರ್ ಐ ಕೋಟಾ ಕೋರಿ ಕೇಂದ್ರಕ್ಕೆ ಪತ್ರ ಬರೆದ ಸಚಿವ ಶರಣಪ್ರಕಾಶ್ ಪಾಟೀಲ್

    • >ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ 
    • >ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ
    • >508 ಸೂಪರ್ ನ್ಯೂಮೆರರಿ ಎಂಬಿಬಿಎಸ್ ಸೀಟುಗಳನ್ನು ಮಂಜೂರುಮಾಡುವಂತೆ ಕೇಂದ್ರಕ್ಕೆ ಒತ್ತಾಯ

    ಸತ್ಯಕಾಮ ವಾರ್ತೆ ಬೆಂಗಳೂರು:

    ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜುಗಳಲ್ಲಿ 2025-26ನೇ ಶೈಕ್ಷಣಿಕ ವರ್ಷದಿಂದ ಅನಿವಾಸಿ ಭಾರತೀಯ (ಎನ್ ಆರ್ಐ) ಕೋಟಾ ಆರಂಭಿಸಲು ಸೂಪರ್ ನ್ಯೂಮರರಿ ಎಂಬಿಬಿಎಸ್ ಸೀಟುಗಳನ್ನು ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ವೈದ್ಯಕೀಯ ಶಿಕ್ಷಣ ಇಲಾಖೆ ಪತ್ರ ಬರೆದಿದೆ.

    ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‍ಎಂಸಿ) ಅಧ್ಯಕ್ಷರಿಗೆ ಈಕುರಿತು ಪತ್ರ ಬರೆದಿದ್ದು, ರಾಜ್ಯದಲ್ಲಿರುವ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಕ್ಕಾಗಿ 508 ಹೆಚ್ಚುವರಿ ಸೂಪರ್ ನ್ಯೂಮರರಿ (supernumerary) ಎಂಬಿಬಿಎಸ್ ಸೀಟುಗಳನ್ನು ಸೃಷ್ಟಿಸುವ ಮೂಲಕ ಶೇ 15ರಷ್ಟು ಎನ್ಆರ್ ಐ ಕೋಟಾ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ.

    ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಯುಜಿ-ಎಂಬಿಬಿಎಸ್ ವಾರ್ಷಿಕ ಮಂಜೂರಾದ ಸೀಟುಗಳ ಮೇಲೆ ಹೆಚ್ಚುವರಿ ಸೀಟುಗಳನ್ನು ರಚಿಸುವುದು ಸೂಪರ್ ನ್ಯೂಮರರಿ ಉದ್ದೇಶವಾಗಿದೆ. ಪ್ರಸ್ತಕ ವೈದ್ಯಕೀಯ ಶಿಕ್ಷಣ ಇಲಾಖೆಯಡಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳು 2023-24ನೇ ಸಾಲಿನಲ್ಲಿ 3,450 ಸೀಟುಗಳ ಸಾಮಥ್ರ್ಯವನ್ನು ಹೊಂದಿದ್ದು ಅದರಲ್ಲಿ 85% (2929 ಸೀಟುಗಳು) ಕರ್ನಾಟಕ ಕೋಟಾ ಮತ್ತು 521 ಅಂದರೆ15% ಅಖಿಲ ಭಾರತ ಕೋಟಾ ಆಗಿದೆ.

    ಈಗಾಗಲೇ ರಾಜಸ್ಥಾನ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಪುದುಚೇರಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.7-15ರಷ್ಟು ಎನ್ ಆರ್ ಐ ಕೋಟಾವನ್ನು ನೀಡಿರುವ, ನಿದರ್ಶನಗಳನ್ನು ಹಾಗು ಈ ರಾಜ್ಯಗಳು ಎನ್ ಆರ್ ಐ ವಿದ್ಯಾರ್ಥಿಗಳಿಗೆ ವಾರ್ಷಿಕ 75,000 ಡಾಲರ್ ದಿಂದ 100,000 ಡಾಲರ್ ಗಿಂತ ಹೆಚ್ಚು ಶುಲ್ಕ ವಿಧಿಸಿರುವುದ್ದನು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಬಜೆಟ್ ಹಂಚಿಕೆ, ವಿದ್ಯಾರ್ಥಿಗಳ ಶುಲ್ಕ, ಕೇಂದ್ರ ಮತ್ತು ರಾಜ್ಯಅನುದಾನಗಳು ಮತ್ತು ಇತರ ದೇಣಿಗೆಗಳ ಹೊರತಾಗಿಯೂ ರಾಜ್ಯದ ಸ್ವಾಯತ್ತ ವೈದ್ಯಕೀಯ ಸಂಸ್ಥೆಗಳು ಹಣದ ಕೊರತೆಯನ್ನು ಎದುರಿಸುತ್ತಿವೆ ಎಂದು ಪಾಟೀಲ್ ಪತ್ರದಲ್ಲಿ ಹೇಳಿದ್ದಾರೆ.

    ಕರ್ನಾಟಕದಲ್ಲಿ ಎನ್ ಆರ್ ಐ ಕೋಟಾ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಮಾತ್ರ ಅನುಮತಿಯಿದ್ದು, ಪ್ರತಿ ವಿದ್ಯಾರ್ಥಿ ವಾರ್ಷಿಕ 1 ಕೋಟಿ ರೂ ಯಿಂದ 2.5 ಕೋಟಿ ರೂ. ಕೋರ್ಸ್ ಶುಲ್ಕ ಪಾವತಿಸಬೇಕಾಗುತ್ತದೆ. ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜುಗಳಲ್ಲಿ ಎನ್ ಆರ್ ಐ ಕೋಟಾ ಜಾರಿಯಾದಲ್ಲಿ ವಿದ್ಯಾರ್ಥಿಗೆ ವಾರ್ಷಿಕ ರೂ. 25 ಲಕ್ಷ ಶುಲ್ಕ ನಿಗದಿಪಡಿಸಬಹುದು, ಇದು ವೈದ್ಯಕೀಯ ಶಿಕ್ಷಣ ಇಲಾಖೆಗೆ ಮೊದಲ ವರ್ಷಕ್ಕೆ 127 ಕೋಟಿ ರೂ ಮತ್ತು 5ನೇ ವರ್ಷಕ್ಕೆ 571.5 ಕೋಟಿ ರೂ. ಸಂದಾಯವಾಗುತ್ತದೆ. ಈ ಸಂಸ್ಥೆಗಳನ್ನು ಶ್ರೇಷ್ಠತೆಯ ಕೇಂದ್ರವನ್ನಾಗಿ ಮಾಡಲು, ಗುಣಮಟ್ಟದ ಶಿಕ್ಷಣ, ತರಬೇತಿ, ನಿರ್ವಹಣೆ, ವೈದ್ಯಕೀಯ ಉಪಕರಣಗಳು, ಔಷಧಗಳ ಖರೀದಿ, ರೋಗಿಗಳ ಹೊರೆ ನಿರ್ವಹಣೆ, ಮೂಲಸೌಕರ್ಯ ಸುಧಾರಣೆ, ಅಧ್ಯಾಪಕರ ಸಾಮರ್ಥ್ಯ ಮತ್ತು ಸಂಶೋಧನೆಗೆ ಎನ್‌ಆರ್‌ಐ ಕೋಟಾದ ಮೂಲಕ ಹೆಚ್ಚುವರಿ ಹಣದ ಅಗತ್ಯವಿದೆ ಎಂದು ಸಚಿವರು ಪ್ರತಿಪಾದಿಸಿದ್ದಾರೆ.

    ಲಭ್ಯವಿರುವ ವಾರ್ಷಿಕ ಸೀಟುಗಳ ಒಳಗೆ ಎನ್ ಆರ್ ಐ ಕೋಟಾವನ್ನು ರಚಿಸುವುದು ಕಾರ್ಯಸಾಧ್ಯವಲ್ಲ. ಹಾಗೆ ಮಾಡಿದರೆ ಬಡವರು ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಕಡಿಮೆ ಸೀಟು ಸೃಷ್ಟಿಯಾಗುತ್ತವೆ. ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ನಾವು ವಿರೋಧ ಎದುರಿಸಬೇಕಾಗುತ್ತದೆ ಎಂದು ಪಾಟೀಲ್ ಆತಂಕ ವ್ಯಕ್ತಪಡಿಸಿದ್ದಾರೆ.

    ಈಗಾಗಲೇ ರಾಜ್ಯದಲ್ಲಿರುವ ಸರ್ಕಾರಿ ಪಶು ವೈದ್ಯಕೀಯ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು 15% ಎನ್ ಆರ್ ಐ ಕೋಟಾವನ್ನು ಹೊಂದಿವೆ. ಎನ್ ಆರ್ ಐ ಕೋಟಾದಿಂದ ಈ ವಿಶ್ವವಿದ್ಯಾಲಯಗಳು ಉತ್ತಮ ಸೌಲಭ್ಯಗಳು ಮತ್ತು ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಸಹಾಯ ಮಾಡುತ್ತವೆ ಎಂದು ಯುಜಿಸಿ ಅಧ್ಯಕ್ಷರಿಗೆ ಸಚಿವರು ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

    2025-26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 15% ಎನ್ ಆರ್ ಐ ಕೋಟಾವನ್ನು ಪ್ರಾರಂಭಿಸಲು ರಾಜ್ಯದ ಪ್ರಸ್ತಾವನೆಗೆ ಅನುಮತಿ ಸಿಗುತ್ತದೆ ಎಂಬ ಭರವಸೆಯನ್ನು ಶರಣಪ್ರಕಾಶ್ ಪಾಟೀಲ್ ವ್ಯಕ್ತಪಡಿಸಿದ್ದಾರೆ.